‘Slam’ dog millionaire

Small Screen

ಸ್ಲಂಡಾಗ್ ಮಿಲಿಯನೇರ್ ಚಿತ್ರಕ್ಕೆ ಗೋಲ್ಡನ್ ಗ್ಲೋಬ್ ಬಂತು ಹಾಗೂ ಈಗ ಆಸ್ಕರ್ ಓಟದಲ್ಲೂ ಹನ್ನೊಂದು ಕ್ಷೇತ್ರಗಳಿಗೆ ಅದು ಆಯ್ಕೆಯಾಗಿದೆ. ಎ.ಆರ್. ರೆಹಮಾನಿಗೆ ಗೋಲ್ಡನ್ ಗ್ಲೋಬ್ ಬಂದದ್ದು ಸಂತೋಷ. ಅವರ ಸಂಗೀತ ಮೊದಲು ಕೇಳಿದಾಗ ಚೆನ್ನಾಗಿದೆ ಆದರೆ ಅಧ್ಭುತವಿರಲಿಲ್ಲ. ಆದರೆ ಚಿತ್ರದಲ್ಲಿ ಅದನ್ನು ನೋಡಿದಾಗ ಆ ಸಂಗೀತವೂ ಅದರ ಚಿತ್ರೀಕರಣವೂ ಸೇರಿ ಸಂಗೀತಕ್ಕೆ ಹೊಸ ಬೆಲೆ ಬಂದಿತ್ತು. ಚಿತ್ರಕ್ಕೆ ಇಷ್ಟು ನಿಷ್ಟನಾಗಿ ಸಂಗೀತ ಕೊಡುವುದು ಎ.ಆರ್. ರೆಹಮಾನ್ ಎಂಬ ಮಹಾನುಭಾವನಿಂದ ಮಾತ್ರ ಸಾಧ್ಯ ಎನಿಸಿತು. ಏನೇ ಇರಲಿ ಅವರಿಗೆ ಗೋಲ್ಡನ್ ಗ್ಲೋಬ್ ಬಂದಿದ್ದಂತೂ ಸಂತೋಷದ ವಿಷಯ ಹಾಗೂ ಅದಕ್ಕೆ ಅವರು ಸಂಪೂರ್ಣ ಅರ್ಹರೂ ಕೂಡಾ. ಇನ್ನು ಈ ಚಿತ್ರದ ಕುರಿತಾಗಿ ಅನೇಕ ಪರ-ವಿರೋಧ ಮಾತುಗಳು ಎದ್ದಿದ್ದಾವೆ. ಭಾರತವನ್ನು ಕೀಳಾಗಿ ತೋರಿಸಿದಾಗಲೆಲ್ಲಾ ಕೃತಿಗಳಿಗೆ ವಿದೇಶೀ ಬಹುಮಾನ ಬರುತ್ತೆ ಎಂದು ಅನೇಕರು ಹೇಳಿಕೊಂಡರು. ಅರವಿಂದ ಅಡಿಗರ ಪುಸ್ತಕ ಬಂದಾಗಲೂ ಅನೇಕರು ಇಂಥದ್ದೇ ಮಾತುಗಳನ್ನು ಆಡಿದರು. ಅದರ ಸತ್ಯಾಸತ್ಯತೆಯ ಶೋಧಕ್ಕೆ ಇಳಿಯುವುದು ಬೇಡ​. ಕೇವಲ ಇದನ್ನು ಒಂದು ಚಿತ್ರವಾಗಿ ಪರಿಗಣಿಸೋಣ​. ಆದರೂ… ಮುಂದುವರೆಯುವ ಮೊದಲು… ಗಿರೀಶ್ ಕಾಸರವಳ್ಳಿ, ಅಡೂರು ಗೋಪಾಲ ಕೃಷ್ಣ ಇತ್ಯಾದಿ ಭಾರತದ ಒಂದು ದೊಡ್ಡ ಗುಂಪು ಚಿತ್ರ ನಿರ್ದೇಶಕರ ಚಿತ್ರಗಳು ವಿದೇಶಗಳಲ್ಲಿ ಭಾರೀ ಮಾನ್ಯತೆ ಪಡೆದಿದೆ. ಅವರ ಚಿತ್ರಗಳ ಕುರಿತಾಗಿ ಹೊರದೇಶಗಳಲ್ಲಿ ಗಂಭೀರ ಅಧ್ಯಯನಗಳು ನಡೆದಿವೆ. ಆದರೆ ಇವರ್ಯಾರೂ ಭಾರತವನ್ನು ಕೀಳಾಗಿ ತೋರಿಸಿ ಈ ಅರ್ಹತೆಯನ್ನು ಪಡೆದವರಲ್ಲ. ಅನಂತ ಮೂರ್ತಿಯಂಥ ಕೆಲ ಗಣ್ಯ ಕನ್ನಡ ಲೇಖಕರ ಪುಸ್ತಕಗಳು ಯೂರೋಪಿನ ನಾಲ್ಕೈದು ಭಾಷೆಗಳಿಗೆ ಭಾಷಾಂತರವಾಗಿ ಅನೇಕ ಮುದ್ರಣವನ್ನು ಕಂಡಿದೆ… ಅವರೂ ಭಾರತವನ್ನು ಕೀಳಾಗಿ ತೋರಿಸಲಿಲ್ಲ. ಇಷ್ಟಾಗಿಯೂ ಸ್ಲಂ ಡಾಗ್ ಮಿಲಿಯನೇರಿನಲ್ಲಿ ತೋರಿಸಿದ ಸ್ಲಂಗಳು, ಭೂಗತ ಜಗತ್ತು ನಮ್ಮಲ್ಲಿ ಇರುವುದೇ ತಾನೆ? ಗೋಲ್ಡನ್ ಗ್ಲೋಬ್ ಬರದೇ ಇರುತ್ತಿದ್ದರೆ ಆ ಸಿನೆಮಾ ಒಳ್ಳೆಯ ಸಿನೆಮವಾಗಿರುತ್ತಿತ್ತೇ ಹಾಗಾದರೆ? ಈ ವಾದ ಅಷ್ಟು ಸಮಂಜಸವೆನಿಸುವುದಿಲ್ಲ… ಏನೇ ಇರಲಿ… ಈಗ ಸಿನೆಮಾಕ್ಕೆ ಬರುವ.

ಸ್ಲಂ ಡಾಗ್ ಮಿಲಿಯನೇರಿನಲ್ಲಿ, ಮುಂಬೈಯ ಸ್ಲಂಗಳಲ್ಲಾಡುವ ಅಲ್ಲಿನ ಕೊಚ್ಚೆಯಲ್ಲಿ ಈಜು ಹೊಡೆಯುವ ಪೋರನೊಬ್ಬ ‘ಕೋನ್ ಬನೇಗಾ ಕರೋಡ್ ಪತಿ’ ಎಂಬ ಒಂದು ಟೆಲಿವಿಷನ್ ಆಟದಲ್ಲಿ ಆಡಿ ಗೆಲ್ಲುವ ಕಥೆ ಇದೆ. ಇದು ಕಥೆಯ ಬೆನ್ನುಹುರಿ ಎನ್ನಬಹುದು. ಆ ಆಟದಲ್ಲಿ ಕೇಳುವ ಪ್ರತಿಯೊಂದು ಪ್ರಶ್ನೆಯೂ ಪರಸ್ಪರ ಸಂಬಂಧವಿಲ್ಲದವುಗಳಾದರೂ, ಹೇಗೆ ಆ ಸಂಗತಿಗಳು ವಿಚಿತ್ರ ಕಾರಣಗಳಿಂದಾಗಿ ಈ ಸ್ಲಂ ಒಡನಾಡಿಗೆ ತಿಳಿಯಿತು ಎನ್ನುವುದು ಚಿತ್ರದ ಜೀವಾಳ. ಇಲ್ಲಿ ಸ್ಲಮ್ ಜೀವನದ ನಿಗೂಢ ಮಗ್ಗುಲುಗಳನ್ನು ಪರಿಚಯಿಸುತ್ತಲೇ ಜೀವನದಲ್ಲಿ ಒಂದು ಆಸೆಯನ್ನು ಹುಟ್ಟಿಸುವ ಪ್ರಯತ್ನ ನಡೆಯುತ್ತದೆ. ಇದಿಷ್ಟು ಸಿನೆಮಾದ ಕಥಾ ಭಾಗ.

ಆದರೆ ಚಿತ್ರದ ಕಥೆಯು ಒಟ್ಟಾರೆಯಾಗಿ ಒಂದು ಕಾಲ್ಪನಿಕ ಜಗತ್ತಿನಲ್ಲಿ ನಡೆದಂತೆ ಭಾಸವಾಗುತ್ತದೆ. ಇದಕ್ಕೆ ಭಾರತೀಯರಾದ ನಾವು ನಂಬಲಾರದ ವಿಷಯಗಳು ಈ ಚಿತ್ರದ ಕಥೆಯ ತಿರುವುಗಳನ್ನು ಕೊಡುವಲ್ಲಿ ಗಮನಾರ್ಹ ಭಾಗಗಳಾಗಿರುವುದು ಮುಖ್ಯ ಕಾರಣವಾಗಿರಬಹುದು. ಕಥೆಯಲ್ಲಿ ಮೂಲಭೂತ ಅನೇಕ ದೋಶಗಳಿವೆ. ಮೊದಲನೆಯದಾಗಿ ‘ಕೌನ್ ಬನೇಗಾ ಕರೋಡ್ ಪತಿ’ ಎಂಬ ಆಟದಲ್ಲಿ ಈ ಹುಡುಗ ಆಡುತ್ತಿರುತ್ತಾನೆ. ಅದನ್ನು ದೇಶದಾದ್ಯಂತ ಜನರು ಕಾತುರದಿಂದ ಕಾಯುತ್ತಿರುತ್ತಾರೆ. ಆದರೆ ಮೂಲತಃ ಈ ಆಟವು ಎಂದೂ ನೇರ ಪ್ರಸಾರದಲ್ಲಿ ನಡೆಯುವುದೇ ಇಲ್ಲ. ಅವೆಲ್ಲವೂ ಮೊದಲೇ ಚಿತ್ರೀಕರಿಸಿಕೊಂಡು ತೋರಿಸಲ್ಪಡುವ ಕಾರ್ಯಕ್ರಮಗಳು. ಈ ಗೇಮ್ ಶೋ ಪ್ರಪಂಚದ ೬೪ ದೇಶಗಳಲ್ಲಿ ಯಶಸ್ವಿಯಾಗಿ ನಡೆದಿದೆಯಂತೆ! ಎಲ್ಲೂ ನೇರಪ್ರಸಾರ ನಡೆದಿಲ್ಲ… ಇಲ್ಲಿಗೆ ಚಿತ್ರದಲ್ಲಿ ಟೆನ್ಶನ್ ಕಟ್ಟಲು ಬಳಸಿರುವ ಅತಿ ದೊಡ್ಡ ಪರಿಕರವೇ ಸುಳ್ಳು ಎಂದಂತಾಗುತ್ತದೆ. ಅದಂತಿರಲಿ… ಅದನ್ನು ಪೊಯೆಟಿಕ್ ಫ್ರೀಡಂ ಎನ್ನೋಣ ಎನ್ನುತ್ತೀರಾ? ಆದರೆ ಅಂಥಾ ಅನೇಕ ಪೊಯೆಟಿಕ್ ಫ್ರೀಡಂ ಬಳಸಿಕೊಂಡು ಇಲ್ಲಿ ಕಥೆ ಬೆಳೆಯುತ್ತಾ ಹೋಗುತ್ತದೆ. ಮತ್ತೆ ಅಲ್ಲಿ ಹೇಳಲಿಕ್ಕೆ ಹೊರಟಿರುವ ಕಥೆ ವಾಸ್ತವದ ಹತ್ತಿರದ್ದು ಎನ್ನುವ ಪ್ರಯತ್ನವನ್ನು ಚಿತ್ರ ಮಾಡುತ್ತದೆ. ಇಲ್ಲಿಯೇ ಈ ಪೊಯೆಟಿಕ್ ಫ್ರೀಡಂ ತೊಂದರೆ ಕೊಡುವುದು.

ಇನ್ನು ಕಥೆಯಲ್ಲಿನ ಅತಿ ದೊಡ್ಡ ತೊಂದರೆ ಎಂದರೆ ಅದರಲ್ಲಿ ಬಳಸಿರುವ ಭಾಷೆ. ಅನೇಕ ಪಾತ್ರಗಳು ಹಿಂದಿಯಲ್ಲಿ ಮಾತನಾಡುತ್ತವೆ. ಮತ್ತೆ ಕೆಲವು ಭಾರತೀಯ ಇಂಗ್ಲೀಷಿನಲ್ಲಿ ಮಾತನಾಡುತ್ತವೆ. ಆದರೆ ಕಥಾ ನಾಯಕ, ಕಾಲ್ ಸೆಂಟರಿನಲ್ಲಿ ಟೀ ಕೊಡುತ್ತಿದ್ದ ಹುಡುಗ ಬ್ರಿಟೀಷ್ ಇಂಗ್ಲೀಷಿನಲ್ಲಿ ಮಾತನಾಡುತ್ತಾನೆ. ಅವರ ಉಚ್ಚರಣೆ ಸಹಿತವಾಗಿ! ಇದು ಮತ್ತೆ ಆ ಹುಡುಗನೊಂದಿಗೆ ಸಹೃದಯರಾಗುವಲ್ಲಿ ನಮಗೆ ತೊಂದರೆಯನ್ನು ತಂದುಕೊಡುತ್ತದೆ. ಹಾಗೆ ನೋಡಿದರೆ ಈ ಹುಡುಗನ ಬಾಲ್ಯವನ್ನು ತೋರಿಸುವಾಗ ನಿಜವಾದ ಸ್ಲಂ ಹುಡುಗನೊಬ್ಬನನ್ನು ಬಳಸಿಕೊಂಡಿದ್ದಾರೆ. ಅವನು ಅಸಾಧ್ಯ ನೈಜತೆಯೊಂದಿಗೆ ನಟಿಸಿದ್ದಾನೆ. ಆದರೆ ಹುಡುಗ ದೊಡ್ಡವನಾಗುತ್ತಾ ಅವನಿಂದ ನಮ್ಮ ಮನಸ್ಸು ಇನ್ನೊಂದೆಡೆಗೆ ಹೋಗಿಬಿಡುತ್ತದೆ.

ಚಿತ್ರದಲ್ಲಿ ಹುಡುಗನಿಗೆ ಅವನ ಬಾಲ್ಯದ ಘಟನಾವಳಿಗಳಿಂದಾಗಿ ‘ಕೌನ್ ಬನೇಗಾ ಕರೋಡ್ ಪತಿ’ ಆಟದಲ್ಲಿ ಕೇಳುವ ಪ್ರಶ್ನೆಗಳಿಗೆ ಉತ್ತರಗಳು ಗೊತ್ತಿರುತ್ತವೆ ಎನ್ನುವುದು ಕಥೆಯ ಸಾರ. ಆದರೆ ಆ ಸನ್ನಿವೇಷಗಳಲ್ಲಿ ಅವನಿಗೆ ಉತ್ತರ ಗೊತ್ತಾಗುವ ಪ್ರಕ್ರಿಯೆ ಮತ್ತಷ್ಟು ಜಾಳಾಗಿವೆ. ಮತೀಯ ಗಲಭೆಗಳ ನಡುವೆ ಒಬ್ಬ ಹುಡುಗ ರಾಮನ ವೇಷ ಧರಿಸಿ ಯಾಕೆ ನಿಂತಿರುತ್ತಾನೆ? ಇದು ಕನಸೇ ವಾಸ್ತವವೇ? ಒಬ್ಬ ಕೇವಲ ಸ್ಲಂ ಹುಡುಗನ ಕೈಯಲ್ಲಿ ಕೋಲ್ಟ್ ೪೫ ಎಂಬ ಆಧುನಿಕ ರಿವಾಲ್ವರ್ ಹೇಗೆ ಬರುತ್ತದೆ? (ಯಾವುದೇ ಲೋಕಲ್ ರೌಡಿಯ ಕೈಯಲ್ಲಿ ರಿವಾಲ್ವರ್ ಬರುವುದು ಸುಲಭವಲ್ಲ. ಹಾಗೆ ಬಂದರೂ ಅದು ಮೊದಲು ಯಾವುದೋ ದೇಸೀ ಮೇಕ್ ಆಗಿರುವುದು ಸಹಜ ಅಲ್ಲವೇ? ಅಷ್ಟಕ್ಕೂ ಇವನು ಬರೇ ಒಬ್ಬ ಸಣ್ಣ ಹುಡುಗ!) ಕಾಲ್ ಸೆಂಟರಿನಲ್ಲಿ ಟೀ ಕೊಡುವ ಹುಡುಗ ಬ್ರಿಟೀಷ್ ಇಂಗ್ಲೀಷ್ ಕಲಿಯಲು ಹೇಗೆ ಸಾಧ್ಯ? ಅಮೇರಿಕನ್ ದಂಪತಿಗಳು ಎಷ್ಟೇ ಕರುಣಾ ಮಯಿಗಳಾಗಿದ್ದರೂ, ಭಾರತದಲ್ಲಿ ಒಬ್ಬ ಹುಡುಗನಿಗೆ ದಾನ ಕೊಡುವಾಗ ನೂರು ಡಾಲರ್ ನೋಟು ಕೊಟ್ಟಾರೇ? (ಅದೂ ಡಾಲರ್! ಹುಡುಗ ಪಾಪ ಅದನ್ನು ಹೇಗೆ ರೂಪಾಯಿಗೆ ಪರಿವರ್ತಿಸಿಕೊಳ್ಳುವುದು ಎನ್ನುವ ಪರಿವೆಯಾದರೂ ಅವರಿಗೆ ಬೇಡವೇ?!) ತಾಜ್ ಮಹಲ್ ನೋಡಲು ಬರುವ ವಿದೇಶೀಯರು ಅಲ್ಲಿನ ಒಬ್ಬ ಹುಡುಗನಿಂದ ಇದೊಂದು ಪಂಚತಾರಾ ಹೋಟೇಲ್ ಎಂದು ನಂಬುವಷ್ಟು ಮುಠಾಳರೇ? ಗೇಮ್ ಶೋ ನಡೆಸುತ್ತಿರುವ ಅನಿಲ್ ಕಪೂರಿಗೆ ಯಾಕೆ ಈ ಹುಡುಗನ ಮೇಲೆ ದ್ವೇಷ? ಹೀಗೆ ಕಥೆಯ ತುಂಬಾ ನಮ್ಮಲ್ಲಿಯ ರಸ್ತೆಗಳಂತೆ ಗುಂಡಿಗಳಿವೆ.

ಚಿತ್ರಕ್ಕೆ ರೆಹಮಾನ್ ಸಂಗೀತ ಮೆರುಗನ್ನು ಕೊಟ್ಟಿದೆ ಸಂಶಯವಿಲ್ಲ. ಆದರೆ ಇದಕ್ಕಿಂತ ಉತ್ತಮ ಕೆಲಸವನ್ನು ಇದೇ ರೆಹಮಾನ್ ಮೊದಲು ಭಾರತೀಯ ಚಿತ್ರಗಳಿಗೇ ಮಾಡಿದ್ದಾರೆ. ಆಗ ಯಾಕೆ ಗೋಲ್ಡನ್ ಗ್ಲೋಬ್ ಅವರಿಗೆ ಬಂದಿಲ್ಲ?! ಆಸ್ಕರಿಗೆ ಯಾಕೆ ಹೆಸರು ಸೂಚಿತವಾಗಿಲ್ಲಾ?! ಗೊತ್ತಿಲ್ಲ. ಹೀಗೆ ಈ ಚಿತ್ರ ಅನೇಕ ಸಂಶಯಗಳನ್ನು ಹುಟ್ಟು ಹಾಕಿಸುತ್ತಾ, ಚೆನ್ನಾಗಿ ಚಿತ್ರೀಕರಿಸಿರುವ ಮಾಮೂಲು ಹಿಂದೀ ಚಿತ್ರದಂತೆ ಉಳಿದು ಬಿಡುತ್ತದೆ. ಇದಕ್ಕೆ ಆಸ್ಕರ್ ಸಿಕ್ಕುವುದು ಸಂಶಯದ ವಿಷಯ. ಸಿಕ್ಕಿದರೆ, ಆ ಪ್ರಶಸ್ತಿಯ ನಿಜ ರೂಪ ಅರಿವಿಗೆ ಬಂದಂತೆ!

ಮೂರು ಬಾರಿ ಆಸ್ಕರ್ ಪಡೆದಿರುವ ವಾಲ್ಟರ್ ಮರ್ಚ್  ಗಾಡ್ ಫಾದರ್ ಎನ್ನುವ ಕ್ಲಾಸಿಕ್ ಸಿನೆಮಾದ ಸಂಕಲನಕಾರರು ಹಾಗೂ ಧ್ವನಿ ಸಂಯೋಜಕರು! ಅವರನ್ನು ಆಸ್ಕರ್ ಸಿಗುವುದು ಎಂಥಾ ಅನುಭವ ಎಂದು ಕೆಳಿದಾಗ​, ಅವರು ಸಣ್ಣಕೆ ನಕ್ಕರು.
“ಮೊದಲ ಬಾರಿ ನಂಬಲಾರದಷ್ಟು ಸಂತಸವಾಯಿತು. ಎರಡನೇ ಬಾರಿ ಬಹಳ ಸಂತೋಷವಾಯಿತು. ಮೂರನೇ ಬಾರಿ ಸಂತೋಷವಾಯಿತು…. ಮತ್ತೆ…. ಹ… ಹ್ಹ….” ಮತ್ತೆ ಏನಾಯಿತು ಎಂದು ಕೆಳಿದಾಗ, “ಮತ್ತೆ ಮುಂದಿನ ಬಾರಿ ನಾನು ಆಯ್ಕೆ ಸಮಿತಿಯಲ್ಲಿದ್ದೆ. ಅಲ್ಲಿ ಅವರು – ಇವನಿಗೆ ಕಳೆದ ವರ್ಷ ಕೊಟ್ಟಿದ್ದೇವೆ. ಈ ವರ್ಷ ಬೇಡ… ಅವನು ಪಾಪ ಸುಮಾರು ವರ್ಷಗಳಿಂದ ಕಾಯುತ್ತಿದ್ದಾನೆ. ಅವನಿಗೆ ಕೊಡೋಣ – ಹೀಗೆ ಮಾತನಾಡಿಕೊಂಡು ಪ್ರಶಸ್ತಿಗಳನ್ನು ನಿರ್ಧರಿಸುತ್ತಿದ್ದರು. ಇದನ್ನು ಕಂಡು ನನಗೆ ಬಂದ ಪ್ರಶಸ್ತಿಗಳ ಬಗ್ಗೆ ಗೌರವವೇ ಹೋಯಿತು”
ಆಸ್ಕರ್ ಅಂದರೆ ಇಷ್ಟೇನಾ? ಮತ್ತೆ ಯಾಕೆ ನಮ್ಮಲ್ಲಿ ಈ ಆಸ್ಕರ್, ಗೋಲ್ಡನ್ ಗ್ಲೋಬ್ ಬಗ್ಗೆ ಇಷ್ಟೊಂದು ವ್ಯಾಮೋಹ? ಬೂಕರ್ ಬಗ್ಗೆ ವ್ಯಾಮೋಹ? ಇವೆಲ್ಲವೂ ಒಂದು ವಿಷ ವೃತ್ತ. ಅಲ್ಲಿ ಗುಣ ಮಟ್ಟ ಇಲ್ಲ, ಬರೇ ರಾಜಕೀಯ ಎಂದಲ್ಲ ಹೇಳುತ್ತಿರುವುದು. ಆದರೆ ಅಲ್ಲಿ ಗುಣ ಮಟ್ಟ ಮಾತ್ರ ಅಲ್ಲ ರಾಜಕೀಯವೂ ಇದೆ ಎನ್ನುವುದು ಈ ಮಾತಿನ ಅರ್ಥ. ಅದರ ಕುರಿತಾಗಿ ಇನ್ನೊಮ್ಮೆ ಎಂದಾದರೂ ಮಾತನಾಡೋಣ​. ಇಂದಿಗೆ ಇಷ್ಟೇ ಗೆಳೆಯರೇ…

-ಅಭಯ ಸಿಂಹ

Discover more from KannadaScreens

Subscribe now to keep reading and get access to the full archive.

Continue reading