ಶಿವರಾಜಕುಮಾರ್ ವೈದ್ಯನ ಪಾತ್ರ ನಿರ್ವಹಿಸದೆ ಸಾಕಷ್ಟು ಸಮಯವೇ ಆಗಿತ್ತು. ‘ಗಡಿಬಿಡಿ ಕೃಷ್ಣ’ ಚಿತ್ರದಲ್ಲಿ ವೈದ್ಯರಾಗಿ ಕಾಣಿಸಿಕೊಂಡಿದ್ದ ಶಿವರಾಜ್ಕುಮಾರ್, ಸುಮಾರು 27 ವರ್ಷಗಳ ನಂತರ ಪುನಃ ‘ಡ್ಯಾಡ್’ ಎಂಬ ಹೊಸ ಚಿತ್ರದಲ್ಲಿ ವೈದ್ಯರಾಗಿ ಅಭಿನಯಿಸುತ್ತಿದ್ದಾರೆ.
ಡ್ಯಾಡ್ ಚಿತ್ರದ ಮುಹೂರ್ತ ಸೋಮವಾರ ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದ ಬೃಹತ್ ನಂದಿ ವಿಗ್ರಹದ ಎದುರು ನೆರವೇರಿದೆ. ಮೊದಲ ದೃಶ್ಯಕ್ಕೆ ಗೀತಾ ಶಿವರಾಜ್ಕುಮಾರ್ ಆರಂಭ ಫಲಕ ತೋರಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಈ ಹಿಂದೆ ‘ಭಗವಂತ್ ಕೇಸರಿ’, ‘ಉಗ್ರಂ’, ‘ಟಕ್ ಜಗದೀಶ್’ ಮುಂತಾದ ತೆಲುಗು ಚಿತ್ರಗಳನ್ನು ನಿರ್ಮಿಸಿದ್ದ ಹರೀಶ್ ಪೆದ್ದಿ, ಈ ಚಿತ್ರವನ್ನು ಮೈರಾ ಕ್ರಿಯೇಷನ್ಸ್ ಲಾಂಛನದಡಿ ನಿರ್ಮಿಸುತ್ತಿದ್ದಾರೆ. ಇನ್ನು, ತೆಲುಗಿನಲ್ಲಿ ‘ಅಸಾಧ್ಯುಡು’, ‘ಮಿಸ್ಟರ್ ನೂಕಯ್ಯ’ ಮತ್ತು ‘ಹಿಡಿಂಬ’ ಚಿತ್ರಗಳನ್ನು ನಿರ್ದೇಶಿಸಿರುವ ಅನಿಲ್ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕ, ನಿರ್ದೇಶಕರಿಬ್ಬರಿಗೂ ಇದು ಕನ್ನಡದಲ್ಲಿ ಮೊದಲ ಚಿತ್ರ. ‘ಶಿವಣ್ಣ 131’ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಬಿ.ಎಸ್. ಸುಧೀಂದ್ರ ಈ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
‘ಡ್ಯಾಡ್’ ಚಿತ್ರದಲ್ಲಿ ಶಿವರಾಜ್ಕುಮಾರ್ ಜೊತೆಗೆ ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್ ವೆಂಜರಮೂಡು ಮುಂತಾದವರು ನಟಿಸುತ್ತಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದೆ. ಬಿ. ರಾಜಶೇಖರ್ ಈ ಚಿತ್ರದ ಛಾಯಗ್ರಾಹಕರು.


